Wednesday, 11 September 2013

ಸಾಹಿತ್ಯದ ತಾಯಿಬೇರು ಜಾನಪದ


  ಸಾಹಿತ್ಯದ ತಾಯಿ ಬೇರು “ಜಾನಪದ”

                          * ಡಾ. ಪ್ರಕಾಶ ಗ. ಖಾಡೆ


ಜನಪದ ಸಾಹಿತ್ಯ ಜನ ಬದುಕಿದ, ಬದುಕುತ್ತಿರುವ ಎಲ್ಲ ಪ್ರದೇಶಗಳಲ್ಲೂ ಎಲ್ಲ ಕಾಲಕ್ಕೂ

ಉಳಿದುಕೊಂಡು ಬಂದಿದೆ. ಯಾವುದೇ ದೇಶದ ಮೊದಲ ಸಾಹಿತ್ಯ ಆ ದೇಶದ ಜನಪದ ಸಾಹಿತ್ಯವೇ ಆಗಿದೆ. ಈ ಕಾರಣವಾಗಿ ಅದರ ಒಡಲೊಳಗೇ ಉದಿಸಿ ಬಂದ ಶಿಷ್ಟ ಸಾಹಿತ್ಯದ ಬೇರುಗಳು ಜಾನಪದವೇ ಆಗಿರುವುದು ಸರ್ವವಿಧಿತ. ಕಾಲ ಕಾಲಕ್ಕೆ ಕಾವ್ಯದ ರೂಪ ಕಟ್ಟುವಿಕೆಯ ಶೈಲಿ ಬದಲಾಗುತ್ತ ಬಂದರೂ ಜಾನಪದರಿಂದಲೇ ಹೊಸತನ ಪಡೆದುಕೊಂಡು ನೆಲೆನಿಂತಿರುವುದು ಕಾಣುತ್ತೇವೆ. ಇವತ್ತು ತನ್ನ ಸತ್ವ ಸೊಗಡು ಕಳೆದುಕೊಂಡಿರುವ ಶಿಷ್ಟ ಸಾಹಿತ್ಯ ಜೀವಂತವಾಗಲು ಜನಪದ ಸಾಹಿತ್ಯದ ಬೇರಿನಿಂದ ನೀರು ಕುಡಿಯಬೇಕಾಗಿದೆ. ಕೇವಲ ಹಳೆಯದರ ಪಳೆಯುಳಿಕೆಯಾಗದಂತೆ ಜನಪದ ಸಾಹಿತ್ಯ ಇವತ್ತು ಆಧುನಿಕತೆಯ ಶಕ್ತಿ, ಸೌಂದರ್ಯ, ವೈಚಾರಿಕತೆ ಮೈಗೂಡಿಸಿಕೊಂಡು ಬೆಳೆದು ನಿಲ್ಲ ಬೇಕಾದ ಕಾಲ ಬಂದಿದೆ. ಹೀಗಾಗಿ ಜನಪದದಿಂದ ಶಿಷ್ಟ ಸಾಹಿತ್ಯ, ಶಿಷ್ಟ ಸಾಹಿತ್ಯದಿಂದ ಜನಪದ ಸಾಹಿತ್ಯ ಒಂದಕ್ಕೊಂದು ಪೂರಕವಾಗಿ ಕೊಡಕೊಳ್ಳುವ ಕಾರ್ಯ ನಡೆದೆ ಇದೆ. ಈ ಮೂಲಕ ಹೃದಯದಲ್ಲಿ ನಿಂತ ಜನಪದರು ವೈಚಾರಿಕ ನೆಲೆಗಟ್ಟಿನಲ್ಲಿ, ವೈಚಾರಿಕ ನೆಲೆಗಟ್ಟಿನಲ್ಲಿದ್ದ ಶಿಷ್ಟರು  ಹೃದಯದಲ್ಲಿ ನಿಂತು ಬದುಕುವ ಸಂದರ್ಭ ಸೃಷ್ಠಿಯಾಗಿದೆ. ‘ಆಧುನಿಕತೆಯಿಂದ ಜನಪದವೂ ಜೀವಂತವಾಗುವುದು. ಜನಪದ ಸಾಹಿತ್ಯದ ಸತ್ವ ಸೊಬಗುಗಳಿಂದ ಇಂದಿನ ಹೆಚ್ಚಿನ ಕವಿಗಳು ಶಿಷ್ಟ ಸಾಹಿತ್ಯ ರಚಿಸುತ್ತಿರುವ ಅವರ ಕಾವ್ಯ ಜೀವಂತವಾಗಿರಲು ಕಾರಣವಾಗಿದೆ. ಇಲ್ಲದಿದ್ದರೆ ಅವರ ರಚನೆಗಳೆಲ್ಲ ಕಾಗದದ ಹೂವುಗಳಾಗುವವು’ಎಂಬ ಚೆನ್ನಣ್ಣ ವಾಲೀಕಾರರ ಮಾತುಗಳು ಜಾನಪದವನ್ನು ಅರಗಿಸಿ ಕೊಂಡ ಶಿಷ್ಟತೆಯ ಪ್ರಸ್ತುತತೆಯನ್ನು ಕಂಡರಿಸುತ್ತದೆ.

                ಆದಾವ ನಮ ಜೋಳ


                ಉಳಿದಾವ ನಮ ಹಾಡ

   ಎನ್ನುವಂತೆ ಜನಪದಕ್ಕೆ ಅಂತ್ಯ ಎಂಬುದು ಇಲ್ಲ. ಅದು ಬೇರೆ ಬೇರೆ ರೂಪದಿಂದ ಹೊರ ಹೊಮ್ಮುತ್ತಲೇ ಇರುತ್ತದೆ. ವೈಜ್ಞಾನಿಕ ನಾಗರಿಕತೆಯ ಹಾಗೂ ಅರ್ವಾಚೀನ ಕಲೆಗಳ ತಾಯಿ ಬೇರುಗಳನ್ನು ಪ್ರಾಚೀನ ಜನಪದದಲ್ಲಿ ಗುರುತಿಸುತ್ತೇವೆ.


     ಖ್ಯಾತ ವಿದ್ವಾಂಸರಾದ ದೇ.ಜವರೇಗೌಡರು ಹೇಳುವಂತೆ:

“ಮುತ್ತಜ್ಜನೆಂತು ಮೊಮ್ಮಗನಿಗೆ ಪೂಜ್ಯನೋ ಅಂತೆಯೇ ಶಿಷ್ಟಪದಕ್ಕೆ ಜಾನಪದ ಆರಾಧ್ಯವಾಗುತ್ತದೆ. ಶಿಷ್ಟ ಸಾಹಿತ್ಯ ಯಾವಾಗಲೂ ಎಂದಿನಿಂದಲೂ ಜನಪದ ಸಾಹಿತ್ಯಕ್ಕೆ ಋಣಿಯಾಗಿದೆ. ಹೋಮರ್, ವಾಲ್ಮೀಕಿ, ವ್ಯಾಸಾದಿ ಕವಿಗಳೆಲ್ಲರೂ ಅಜ್ಞಾತ ಜನಪದ ಕವಿಗಳಿಗೆ ನಾನಾ ರೀತಿಯಲ್ಲಿ ಋಣಿಗಳಾಗಿದ್ದಾರೆನ್ನುವುದು ಸರ್ವವೇದ್ಯ ಸಂಗತಿಯಾಗಿದೆ.” ಶಿಷ್ಟ ಸಾಹಿತ್ಯ ಮಡುಗೊಂಡು ಪಾಚಿ ಬೆಳೆದು ಬಗ್ಗಡಗೊಂಡು ನಾರುವಂತಾದಾಗ ಜನಪದ ಸಾಹಿತ್ಯ  ವಾಹಿನಿ ಅದರ ಮೇಲೆ ಹರಿದು ಪಾಚಿ ಕೊಳಕುಗಳನ್ನು ಕೊಚ್ಚಿ ನೂತನ ಜೀವನವನ್ನು ನೀಡಿದ್ದುಂಟು. ವಡ್ರ್ಸವರ್ತ, ಬರನ್ಸ,  ಸ್ಕಾಟ್, ಪುಸ್ಕಿನ್, ಕುಮಾರವ್ಯಾಸ, ವಚನಕಾರರು ಈ ಮಾತಿಗೆ ಸಾಕ್ಷಿಯಾಗಿದ್ದಾರೆ. ಅದರಂತೆ ಪಂಪ ತನ್ನ ಕಾವ್ಯದ ಉನ್ನತಿಗೆ ಪ್ರೌಢದ ಜತೆಗೆ ದೇಸೀಯನ್ನು ಸಮೀಕರಿಸಿದ್ದಾನೆ.ಶಿವಶರಣರು ತಮ್ಮ ಹಿಂದಿನ ಚಂಪೂ ಪರಂಪರೆಯನ್ನು ಮುರಿದು ವಚನ ಪರಂಪರೆಯನ್ನು ಪ್ರತಿಷ್ಠಾಪಿಸಲು ಜನಪದ ಸಾಹಿತ್ಯವನ್ನೇ ಆಶ್ರಯಿಸಿದರು. ಜನಪದ ಭಾಷೆ, ಛಂದಸ್ಸು ಶಿಷ್ಟ ಸಾಹಿತ್ಯದ ಹುಟ್ಟಿಗೆ ಮೂಲವಾಗಿದೆ. ಗರತಿಯ  ತ್ರಿಪದಿಯೇ ಶಿಷ್ಟರ ಚೌಪದಿ, ಷಟ್ಪದಿ ಹುಟ್ಟಿಗೆ ಬುನಾದಿಯಾಗಿದೆ. ಜನಪದ ಛಂದಸ್ಸು, ಜೈನರ ಚಂಪೂ, ವೀರಶೈವರ ವಚನ ರಗಳೆ, ಬ್ರಾಹ್ಮಣರ ಷಟ್ಪದಿ, ದಾಸರ ಹಾಡು, ಸರ್ವಜ್ಞನ ತ್ರಿಪದಿಗಳಿಗೆ ಆಶ್ರಯವಾಗಿದೆ.

               ಜನಪದ ಗೀತೆ ಎಲ್ಲವನ್ನು ಒಳಗೊಂಡ ಬಯಲು ಆಲಯ. ಅದು ಉದ್ದೇಶಪೂರ್ವಕವಾಗಿ ಕಲಾತ್ಮಕವಾದುದಲ್ಲ. ಅದರ ಜೀವಂತಿಕೆಯೇ ಅದರ ಕಲಾತ್ಮಕತೆ, ಅನುಭವ ಮತ್ತು ಶಾಸ್ತ್ರರೂಪದ ಇಲ್ಲಿನ ವಸ್ತು ಜನರ ಸಮೂಹ ಕೇಂದ್ರಿತ ಆಸಕ್ತಿ, ಮಾತೃ ನಂಬಿಕೆಗಳ ಮೇಲೆ ನಿಂತಿರುವಂಥದಾಗಿದೆ. ‘ವ್ಯಕ್ತಿ ವ್ಯವಸ್ಥೆಯ ಸಂಬಂಧ, ಸಾಮಾಜಿಕ ರಚನೆ, ಸಂಘರ್ಷ ರೂಪದ ಜೀವನ, ಮಾನವ ಜೀವನದ ಸ್ಥಿತಿಗತಿಗಳ ನೀತಿ, ನಿಯಮ ನಿಷ್ಠೆ, ಸಾರ್ಥಕತೆಗಳು ಆಚಾರ, ವಿಚಾರ, ಸಂಪ್ರದಾಯ ಜನಪದ ಸಾಹಿತ್ಯದಲ್ಲಿ ಅಡಕವಾಗಿವೆ’ ಹೀಗೆ ಒಟ್ಟು ಬದುಕಿನ ಪ್ರತಿ ಮಗ್ಗಲುಗಳನ್ನು ಆವರಿಸಿಕೊಂಡಿರುವ ಜನಪದವು ಶಿಷ್ಟ ಪ್ರಕಾರಕ್ಕೆ ತನ್ನ ಕೊಡುಗೆ ನೀಡುತ್ತ ಉಳಿದುಕೊಂಡು ಬಂದಿರುವುದು ಅದರ ಚಲನ ಶೀಲತೆಗೆ ಸಾಕ್ಷಿಯಾಗಿದೆ.     

        ಚಂಪೂ, ವಚನÀ, ಷಟ್ಪದಿ, ನವೋದಯ ಸಾಹಿತ್ಯ ಮುಂತಾಗಿ ಕನ್ನಡ ಕಾವ್ಯ ಪರಂಪರೆಯ ಉದ್ದಕ್ಕೂ ಜಾನಪದದ ಇತಿಹಾಸ ಗುರುತಿಸಬಹುದು.ತ್ರಿಪದಿಗಳು, ಕಥನಕವನಗಳು, ಗೊಂದಲಿಗರ ಹಾಡುಗಳು, ಲಾವಣಿಗಳು, ಕೋಲಾಟದ , ಬಯಲಾಟದ ಪದಗಳು, ಡೊಳ್ಳಿನ ಪದಗಳು.. ಹೀಗೆ ಅನೇಕ ರೀತಿಯ ಪದ್ಯ ರೂಪಗಳು ಬಹುಕಾಲದಿಂದಲೂ ನಡೆದು ಬಂದಿರುವುದು ಇತಿಹಾಸದ ಮುಂದುವರಿಕೆಯಾಗಿದೆ.

ಇಂದಿಗೂ ಜನಪದ ಕಾವ್ಯ ಪರಂಪರೆ ಜೀವಂತವಾಗಿದೆ. ಗೊಂದಲಿಗರು, ಹೆಳವರು ತಾವು ಕಲಿತ ಹಾಡುಗಳನ್ನು ತಮ್ಮ ಮಕ್ಕಳಿಗೆ ಕಲಿಸುತ್ತಾರೆ. ತಾವು ಹೋದೆಡೆಗೆ ಅವರನ್ನು ಕರೆದುಕೊಂಡು ಹೋಗುತ್ತಾರೆ. ಹಿಮ್ಮೇಳದಲ್ಲಿ ಉಪಯೋಗಿಸಿಕೊಳ್ಳುತ್ತಾರೆ,

                      ಮುಂದೆ ಅವರೂ ಸ್ವತಂತ್ರವಾಗಿ ಹಾಡಬಲ್ಲವರಾಗುತ್ತಾರೆ. ಶಕ್ತರಾದವರು ಹೊಸ ಹಾಡುಗಳನ್ನು ಕಟ್ಟಿಕೊಂಡು ಜೋಡಿಸಿಕೊಳ್ಳುತ್ತಾರೆ. ಕಂಸಾಳೆ ಸಿರಿಯ ದೇವರ ಗುಡ್ಡರು ಗುರುವಿನ ಮೂಲಕ ಹಾಡುಗಳನ್ನು ಕಷ್ಟಪಟ್ಟು ಕಲಿಯುತ್ತಾರೆ ಇದು ಪರಂಪರೆಯಿಂದ ಸಾಗಿ ಬಂದ ಇತಿಹಾಸ ಗುರುತಿಸುತ್ತದೆ.

        ಜಾನಪದಕ್ಕೆ ಪ್ರಭು ಸಂಸ್ಕ್ರತಿಯಲ್ಲಿ ಹುಟ್ಟಿಕೊಂಡ ಸಾಹಿತ್ಯ ತತ್ತ್ವಗಳನ್ನು ಇವತ್ತಿಗೂ ಅನ್ವಯಿಸಿಕೊಳ್ಳುವ ಬಗ್ಗೆ ಹಿ.ಶಿ. ರಾಮಚಂದ್ರೇಗೌಡರ ವಿರೋಧವಿದೆ. ಶ್ರೇಷ್ಠತೆಯ ಮಾನದಂಡಗಳು ವರ್ಗಸಮಾಜ ಮತ್ತು ಬಹುಸಮಾಜದ ಶ್ರೇಷ್ಠತೆಯನ್ನು ಗುರುತಿಸುವಲ್ಲಿ ಬೇರೆ ಬೇರೆಯಾಗುತ್ತವೆ. ಕಾವ್ಯ ಧ್ವನಿ-ಸಾಂಸ್ಸøತಿಕ ಧ್ವನಿ ಅದು ಅಲೌಕಿಕ ಧ್ವನಿ ಅಲ್ಲ. ಇದರ ಪರಿಣಾಮವಾಗಿ ಸಂಸ್ಕøತಿ ಹುಟ್ಟಿಕೊಳ್ಳುತ್ತದೆ. ಸಾಹಿತ್ಯ ಸ್ಠೃಷ್ಟಿಯಾಗುತ್ತದೆ. ಇಲ್ಲಿ ಶಿಷ್ಟ ಮತ್ತು ಜನಪದ ಸಾಹಿತ್ಯದ ಸಂದರ್ಭಗಳನ್ನು ಗಮನಿಸಬೇಕು.                                              

     ‘ಶಿಷ್ಟ ಜನಪದವಾದರೆ ಅದಕ್ಕೆ ಚಿರಂತತೆ ಬರುವುದು. ಜನಪದ ಶಿಷ್ಟವಾದರೆ ಅದಕ್ಕೆ ಸಾವುಂಟಾಗುವುದು’ ಎಂಬ ಚೆನ್ನಣ್ಣ ವಾಲೀಕಾರರ ಮಾತನ್ನು ಇಲ್ಲಿ ಗಮನಿಸಬೇಕು. ಶಿಷ್ಟರ ಸಾಹಿತ್ಯ ಶಿಷ್ಟರ ಮಧ್ಯೆಯೇ ಬೆಳೆದು ಅಲ್ಲಿಯೇ ಪರ್ಯಾವಸಾನಗೊಳ್ಳುತ್ತದೆ. ಶಿಷ್ಟ ಸಾಹಿತ್ಯದಲ್ಲಿ ಕವಿ, ಗಮಕಿ, ಕೆಲವೊಮ್ಮೆ ಸಹೃದಯ ಇರುತ್ತಾರೆ. ಶಿಷ್ಟ ಸಾಹಿತ್ಯದ ಪ್ರದರ್ಶನಕ್ಕೆ ಸಂದರ್ಭ ಒದಗಿಸಿಕೊಂಡು ಅದಕ್ಕಾಗಿಯೇ ವೇದಿಕೆ ನಿರ್ಮಿಸಬೇಕು. ಶಿಷ್ಟ ಸಾಹಿತಿ ತಾನೇ ರಚಿಸಿದ ಕವನವನ್ನು ಬಾಯಿಪಾಠ ಮಾಡಿ ಹಾಡಬೇಕಾಗುತ್ತದೆ. ಆದರೆ ಜನಪದದಲ್ಲಿ ಹೀಗಿಲ್ಲ. ಜನಪದ ಗೀತೆಗಳನ್ನು ಹಾಡುವವರು ಅವರದೇ ಆದ ರಾಗ, ಭಾವ, ತಾಳ, ಮೇಳಗಳನ್ನು ಅಳವಡಿಸಿಕೊಂಡು ಹಾಡುತ್ತಾರೆ. ಹಾಗೆ ಹಾಡುವಾಗ ಭಾವಕ್ಕನುಗುಣವಾಗಿ ಸಂದರ್ಭ ತಕ್ಕಂತೆ ಹಿಗ್ಗಿಸುವ ಕುಗ್ಗಿಸುವ ಸಾಮಥ್ರ್ಯವೂ ಅವರದಾಗಿರುತ್ತದೆ. ಆದ್ದರಿಂದ ಸಹೃದಯವೇ ಜನಪದ, ಜಾನಪದವೇ ಸಹೃದಯ. ಜನಪದ ಅದಕ್ಕಾಗಿಯೇ ನಿರ್ಮಿಸಿ ಮತ್ತೆ ಕಿತ್ತೆಸುವ ಅಗತ್ಯವಿಲ್ಲ. ಅದು ಜನಸಾಮಾನ್ಯರ ನಿತ್ಯ ಜೀವನದೊಂದಿಗೆ ಬೆರೆತು ಅವರೊಡನೆಯೇ ಜೀವಿಸುತ್ತದೆ. ಜೊತೆಗೆ ಜನಪದ ಕವಿ ಅನುಭಾವಿಯಾಗಿದ್ದರಿಂದ ಅದನ್ನು ಹೇಳುವ ಚತುರನಾಗಿರುತ್ತಾನೆ. ಹೀಗೆ ಶಿಷ್ಟ ಮತ್ತು ಜನಪದ ಸಾಹಿತ್ಯ ತನ್ನ ನೆಲೆಯಲ್ಲಿ ಸ್ವತಂತ್ರವಾಗಿ ಗುರುತಿಸಿಕೊಳ್ಳುತ್ತವೆ.

        ‘ಜನಪದ ಕಾವ್ಯದಲ್ಲಿ ಚಿಕ್ಕಪುಟ್ಟ ಪದಗಳೇ ಹೆಚ್ಚು, ಕಾರಣ ದೀರ್ಘ ಕವಿತೆಗಳನ್ನು ಕಟ್ಟುತ್ತ ನೆನಪಿಡುವುದು ಕಠಿಣ’ ಎಂದು ಹೇಳುವ ಮಾತಿದೆ. ಆದರೆ ಇದು ತಪ್ಪು. ಜನಪದ ಕಾವ್ಯಗಳು ಕೇವಲ ತ್ರಿಪದಿ ರೂಪದ ಪುಟ್ಟ ಪುಟ್ಟ ಕೃತಿಗಳಾಗದೆ ಅನೇಕ ಮಹಾಕಾವ್ಯಗಳು ಜಾನಪದದ ವಿಸ್ತಾರವನ್ನು ಸಾರಿವೆ.’ ಈ ಕಾವ್ಯಗಳ ಹಿರಿಮೆಯನ್ನು ದೇ. ಜವರೇಗೌಡರು ಹೀಗೆ ದಾಖಲಿಸುತ್ತಾರೆ:

       ‘ಮಲೆಯ ಮಾದೇಶ್ವರ ಕಾವ್ಯ, ದೇವರ ಗುಡ್ಡದ ಮಹಾಕಾವ್ಯ ಕಂಸಾಳೆ ವಾದ್ಯದೊಡನೆ ಏಳೆಂಟು ರಾತ್ರಿ ಅವಿಚ್ಛಿನ್ನವಾಗಿ ಅದರ ಗಾಯನ ಸಾಗುತ್ತದೆ. ವೈವಿಧ್ಯಮಯವಾದ ಛಂದೋಬಂಧಗಳಲ್ಲಿ ರಚಿತವಾದ ಲಲಿತಕಾವ್ಯವಿದು... 

                     

ನೀಲಗಾರರಿಗೆ  ಮೀಸಲಾದ ಮಂಟೇಸ್ವಾಮಿ ಕಾವ್ಯ ಒಂದೇ ಒಂದು ಛಂದದಲ್ಲಿ ತಂಬೂರಿಯೊಡನೆ ನಿರರ್ಗಳವಾಗಿ ಹರಿಯುತ್ತದೆ. ಮೊದಲನೆಯದರಲ್ಲಿ ಮೂವತ್ತೆರಡು ಸಾವಿರ ಸಾಲುಗಳೂ, ಎರಡನೆಯದರಲ್ಲಿ ಇಪ್ಪತ್ನಾಲ್ಕು ಸಾವಿರ ಸಾಲುಗಳಿದ್ದು ಕಲೇವಾಲಕ್ಕಿಂತ ಗಾತ್ರದಲ್ಲಿ ದೊಡ್ಡದೆಂದೇ ಹೇಳಬೇಕು. ನೀಲಗಾರರ ಮಂಟೇಸ್ವಾಮಿ ಕಾವ್ಯವನ್ನು ‘ಧರೆಗೆ ದೊಡ್ಡವರ ವಚನ’ವೆಂದು ಕರೆಯುತ್ತಾರೆ. ಸುಮಾರು ಹದಿನೈದು ಸಾವಿರ ಸಾಲುಗಳು ವಿಸ್ತಾರವುಳ್ಳ, ಹತ್ತು ವಿಭಾಗಗಳಲ್ಲಿ ದೊರೆಯುವ ‘ಜನಪದ ಬಸವ ಪುರಾಣ’ವೊಂದು ಸೊಗಸಾದ ಮಹಾಕಾವ್ಯ. ಚೌಡಿಕೆ ಸಂಪ್ರದಾಯದ ಎಲ್ಲಮ್ಮನ ಕಾವ್ಯ ಮತ್ತು ಕಾಡುಗೊಲ್ಲರ ಸಂಪ್ರದಾಯದ ಜುಂಜಪ್ಪನ ಕಾವ್ಯಗಳು ಮಹಾ ಕಾವ್ಯದ ವಿಸ್ತಾರ ಹೊಂದಿರದಿದ್ದರೂ ಗುಣಲಕ್ಷಣಗಳಿಂದ  ಸಮೃದ್ಧವಾದ ಜನಪ್ರಿಯ ಕೃತಿಗಳು’ ಹೀಗೆ ಕೆರೆಯ ಹೊನ್ನಮ್ಮ, ಕಾಳಿಂಗರಾಯ, ಚೆನ್ನಿಗ ಚೆಲುವಯ್ಯ ಮುಂತಾದ ಮಹಾಕಾವ್ಯಗಳು ಕನ್ನಡ ಜನಪದ ಕಾವ್ಯದ ಗುಣ ಗಾತ್ರಗಳೆರಡರಿಂದಲೂ  ಸಮೃದ್ಧವಾಗಿ, ಬೇರೆ ಕಡೆ ಸಿಗದ ಮೌಲಿಕ ಸಾಹಿತ್ಯ ‘ಜಾಗತಿಕ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆಗಳಾಗ ಬಲ್ಲವುಗಳಾಗಿವೆ’ ಎಂದಿದ್ದಾರೆ.

        ಶಿಷ್ಟ ಸಾಹಿತ್ಯÀ ಕೇವಲ ಮನಸ್ಸಿನ ಸಾಹಿತ್ಯ, ಜನಪದ ಸಾಹಿತ್ಯ ದೇಹ ಮತ್ತು ಮನಸ್ಸಿನ ಸಾಹಿತ್ಯ ಇದು ಕ್ರಿಯೆಯೊಂದಿಗೆ ಹುಟ್ಟುತ್ತದೆ. ಬೀಸುವಾಗ, ಕುಟ್ಟುವಾಗ, ಅಲೆದಾಡುವಾಗ, ದೋಣಿ ನಡೆಸುವಾಗ ಹೀಗೆ ಒಟ್ಟು ಕ್ರಿಯೆಯಲ್ಲಿಯೇ ರೂಪುಗೊಂಡು ಬಳಕೆಯಾಗುತ್ತದೆ. ಶಿಷ್ಟ ಸಾಹಿತ್ಯವು ಏಕಸೃಷ್ಟಿಗೆ, ಏಕ ಶ್ರೇಷ್ಠತೆಗೆ ಸಂಬಂಧಪಟ್ಟಿದಾದರೆ, ಜನಪದ ಸಾಹಿತ್ಯ ಪುನರ್ ಸೃಷ್ಠಿಯಾಗುವಂಥದು. ಒಂದು ವ್ಯಕ್ತಿ ಸೃಷ್ಠಿ, ಮತ್ತೊಂದು ಸಮೂಹ ಸೃಷ್ಠಿ. ಜನಪದ ಸಾಹಿತ್ಯ ಸಮಾಜನಿಷ್ಠವಾಗಿ, ವಿಷಯನಿಷ್ಠವಾಗಿ ಮಾತನಾಡುತ್ತದೆ. ಅದು ವಸ್ತುನಿಷ್ಠವಾಗಿ ಮಾತನಾಡುವುದಿಲ್ಲ. ಹೀಗೆ ಅದರ ಪ್ರತ್ಯೇಕ ಅಸ್ತಿತ್ವಗಳನ್ನು ಗುರುತಿಸಿದರೂ ಅವು ಒಂದರೊಳಗೊಂದು  ಬೆಸೆದುಕೊಂಡು ಸೃಷ್ಟಿಯಾಗುತ್ತಿರುವುದು ಜನಪದದ ಪುನರ್ ಸೃಷ್ಟಿಯ ದ್ಯೋತಕವಾಗಿದೆ.

          ‘ಜಾನಪದಕ್ಕೆ ಸಾವಿಲ್ಲ; ಅದು ಭಿನ್ನ ರೂಪದಲ್ಲಿ ಮುಂದುವರೆಯುತ್ತದೆ’ ಎಂಬ ಮಾತಿನಂತೆ ‘ಜಾನಪದ ಪಳಿಯುಳಿಕೆ’ ಎಂಬ ಮಾತೂ ಇದೆ. ಪಳೆಯುಳಿಕೆ ಎಂದರೆ ಅಪ್ರಸ್ತುತ ಪಳೆಯುಳಿಕೆ ಎಂದಲ್ಲ, ಪಳೆಯುಳಿಕೆಯ ಪುನಃಸೃಷ್ಟಿ ಅಂದರೆ ಪಳೆಯುಳಿಕೆಯನ್ನು ಪುನಃಸೃಷ್ಟಿಸುತ್ತಾ ಪ್ರಸ್ತುತಗೊಳಿಸಿಕೊಳ್ಳುವ ಪ್ರಕ್ರಿಯೆಯೇ ಜಾನಪದ ಎಂಬ ತಿದ್ದುಪಡಿಯೊಂದಿಗೆ ತಿಳಿದುಕೊಳ್ಳಬೇಕು ಎಂಬುದು ಅದರ ನಿರಂತರ ಪುನಃಸೃಷ್ಟಿ ಕ್ರಿಯೆಯನ್ನು ಕಾಣುತ್ತೇವೆ. ಪ್ರಸ್ತುತ ಜಾನಪದ ವಿಶ್ವವಿದ್ಯಾಲಯ ಸ್ಥಾಪನೆಯ ಈ ಸಂದರ್ಭದಲ್ಲಿ ಈ ಚಿಂತನೆಗಳು ಪೂರಕವಾಗಲಿ.                ###                                                                                                                                                                    ಡಾ.ಪ್ರಕಾಶ ಗ.ಖಾಡೆ, ,ಮನೆ ನಂ135, ಸೆಕ್ಟರ್ ನಂ63, ನವನಗರ, ಬಾಗಲಕೋಟ -587103. emಚಿiಟ : ಜಡಿಠಿಡಿಚಿಞಚಿshಞhಚಿಜe@gmಚಿiಟ.ಛಿom,



 

ಬಾಗಲಕೋಟ ಜಿಲ್ಲೆಯ ಜಾನಪದ

 ವಿಶೇಷ ಲೇಖನ

         ಬಾಗಲಕೋಟ ಜಿಲ್ಲೆಯ ಜಾನಪದ ಪರಂಪರೆ

                           - ಡಾ.ಪ್ರಕಾಶ ಗ.ಖಾಡೆ

 ಕನ್ನಡ ಜಾನಪದ ಕ್ಷೇತ್ರದಲ್ಲಿ ಬಾಗಲಕೋಟ ಜಿಲ್ಲೆಯು ಹಲವು ಪ್ರಥಮಗಳಿಗೆ ಕಾರಣವಾಗಿದೆ.ಕನ್ನಡ ಜಾನಪದದ ಮೊದಲ ನೇಗಿಲ ಪೂಜೆ ನೆರವೇರಿಸಿದವರು ಈ ಜಿಲ್ಲೆಯವರು ಎಂಬುದು ದಾಖಲಾರ್ಹವಾದುದು.ಕ್ರಿ.ಶ. 700 ರ ಬಾದಾಮಿಯ ಕಪ್ಪೆ ಅರಭಟ್ಟನ ಶಾಸನದಲ್ಲಿ ಸಿಕ್ಕುವ ತ್ರಿಪದಿ ಕನ್ನಡ ಜಾನಪದದ ತಾಯಿ ಬೇರಾದರೆ,ಇದೇ ಬಾದಾಮಿಯಿಂದಲೇ ಕ್ರಿ.ಶ. 1874 ರ ಸುಮಾರಿಗೆ ಕನ್ನಡದಲ್ಲಿ ಮೊದಲ ಜನಪದ ಸಾಹಿತ್ಯ ಸಂಗ್ರಹಣಾ ಕಾರ್ಯ ಆರಂಭವಾಯಿತು.ಜೊತೆಗೆ ಬಾದಾಮಿ ತಾಲೂಕಿನ ಕೆರೂರದ ಡಾ.ಬಿ.ಎಸ್.ಗದ್ದಗಿಮಠರು ಕನ್ನಡ ಜಾನಪದ ಕ್ಷೇತ್ರದಲ್ಲಿ ಮೊದಲ ಪಿಎಚ್.ಡಿ. ಸಂಪಾದಿಸಿದರು.ಹೀಗೆ ಜಾನಪದದ ರೂಪ,ಸಂಗ್ರಹ ,ಸಂಪಾದನೆ,ಸಂಶೋಧನೆ ಕಾರ್ಯಗಳೆಲ್ಲ ಬಾಗಲಕೋಟ ಜಿಲ್ಲೆಯಿಂದಲೇ ಮೊದಲಾದದ್ದು ಒಂದು ಐತಿಹಾಸಿಕ ಸತ್ಯವಾÀಗಿದೆ.
                                                                  ಜಿ.ಬಿ.ಖಾಡೆ
ಹಲಸಂಗಿ ಗೆಳೆಯರು ಮಾಡಿದ ಜನಪದ ಸಾಹಿತ್ಯ ಸಂಗ್ರಹ ಕಾರ್ಯಕ್ಕೆ ಪ್ರೇರಿತರಾಗಿ ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದ ಗಣಪತಿ ಬಾಪು ಖಾಡೆಯವರು ಕ್ರಿ.ಶ. 1965 ರಲ್ಲಿ ಜಮಖಂಡಿ ಭಾಗದ ಹಳ್ಳಿಗಳಲ್ಲಿ ಹಾಡುವ ಬೀಸುಕಲ್ಲಿನ ಪದಗಳು, ಕೋಲಾಟದ ಪದಗಳು,ಡೊಳ್ಳಿನ ಹಾಗೂ ಹಂತಿ ಪದಗಳನ್ನು ಸಂಗ್ರಹಿಸಿದರು.ಹೀಗೆ ಸಂಗ್ರಹಿಸಿದ ಜಿ.ಬಿ.ಖಾಡೆಯವರ ಜನಪದ ಹಾಡುಗಳ ಸಂಕಲನ 'ಕಾಡು ಹೂಗಳು' ಹೆಸರಿನಲ್ಲಿ ಮೈಸೂರು ವಿಶ್ವ ವಿದ್ಯಾಲಯದ ಪ್ರಸಾರಾಂಗದಿಂದ 1973 ರಲ್ಲಿ ಪ್ರಕಟವಾಯಿತು.ಈ ಕೃತಿಯಿಂದ ಜಮಖಂಡಿ ಭಾಗದ ಕೃಷ್ಣಾ ತೀರದ ಜನಪದ ಸಾಹಿತ್ಯ ಮೊದಲ ಬಾರಿಗೆ ಸಂಶೋಧಕರಿಗೆ ಲಭ್ಯವಾಗುವಂತಾಯಿತು.

ಸಧ್ಯ ಮುಧೋಳದಲ್ಲಿ ನೆಲೆಸಿರುವ 72 ವಯಸ್ಸಿನ ಹಿರಿಯ ಜನಪದ ತಜ್ಞರಾದ ಜಿ.ಬಿ.ಖಾಡೆಯವರು ಸಂಪಾದಿಸಿರುವ 23 ಜನಪದ ಕಥೆಗಳ 'ಬೆಳವಲ ಬೆಳಕು 'ಕೃತಿ ಮತ್ತು ಅಪಾರ ಪ್ರಮಾಣದ ಕರಬಲಾ ಪದಗಳ'ಹಳ್ಳಿ ಹಬ್ಬಿಸಿದ ಹೂಬಳ್ಳಿ' ಕೃತಿಗಳನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು 1981 ರಲ್ಲಿ ಪ್ರಕಟಿಸಿದೆ.ಅಲ್ಲದೇ 'ಬದುಕೇ ಜಾನಪದ' ಹೆಸರಿನಲ್ಲಿ ಅವರ ಜನಪದ ಆತ್ಮ ಕಥನವು 2010 ರಲ್ಲಿ ಪ್ರಕಟವಾಗಿದೆ.ಜಮಖಂಡಿ ತಾಲೂಕು ತುಂಗಳದವರಾದ ಡಾ.ಸಂಗಮೇಶ ಬಿರಾದಾರ ಅವರು ಜನಪದ ಸಾಹಿತ್ಯ ಸಂಗ್ರಹದೊಂದಿಗೆ ಸಂಶೋಧನೆಗೆ ಒತ್ತು ಕೊಟ್ಟರು.ಚಾಪ ಹಾಕತೀವ ಡಪ್ಪಿನ ಮ್ಯಾಲ,ತೇರದಾಳದ ಲಾವಣಿಕಾರರು,ಪಾರಿಜಾತ ಪುಷ್ಪಗಳು,ಜಾನಪದ ಅಲೆಗಳು ಡಾ.ಬಿರಾದಾರ ಅವರ ಜನಪದ ಕೃತಿಗಳು.ಡಾ.ಶ್ರೀರಾಮ ಇಟ್ಟಣ್ಣವರ ಅವರು ಬಯಲಾಟಗಳ ರಾಜ ಎಂದೇ ಖ್ಯಾತಿ ಪಡೆದಿರುವ 'ಶ್ರೀ ಕೃಷ್ಣ ಪಾರಿಜಾತ' ಕುರಿತು ಪಿಎಚ್.ಡಿ. ಅಧ್ಯಯನ ಕೈಕೊಂಡು ಮೊದಲಬಾರಿಗೆ ಅದರ ಚರಿತ್ರೆ ಮತ್ತು ಇತಿಹಾಸದ ಮೇಲೆ ಬೆಳಕು ಚೆಲ್ಲಿದರು.ಲಾವಣಿ,ಕೌಜಲಗಿ ನಿಂಗಮ್ಮ ಇವರ ಇತರ ಜಾನಪದ ಕೃತಿಗಳು.ಜಿಲ್ಲೆಯ ಡಾ.ಪಿ.ಕೆ.ಖಂಡೋಬಾ ಅವರು ಲಂಬಾಣಿ ಜೀವನ ಸಂಸ್ಕøತಿ ಕುರಿತು ಆಳವಾದ ಅಧ್ಯಯನ ಮಾಡಿ ಸಂಶೋಧನಾ ಪ್ರಬಂಧ ಪ್ರಕಟಿಸಿದ್ದಾರೆ.ಡಾ.ಮೃತ್ಯುಂಜಯ ಹೊರಕೇರಿ ಅವರ'ಜನಪದ ಬೈಗುಳಗಳು' ಒಂದು ವಿಶಿಷ್ಟ ಜನಪದ ಕೃತಿ.ಎಸ್.ಜಿ.ಕೋಟಿಯವರ'ತೀರದ ದನಿ',ಡಾ.ಸರೋಜಿನಿ ಪಾವಟೆಯವರ 'ಚಲವಾದಿ ಗೌರಮ್ಮನ ಕಥೆಗಳು',ಶಿವಯೋಗಿ ಬಿದರಿಯವರ 'ಪಲ್ಲಕ್ಕಿ ಮ್ಯಾಲ ಮಗ ಬರಲಿ',ಜಿಲ್ಲೆಯ ಪ್ರಮುಖ ಜನಪದ ಕೃತಿಗಳು.
ಹೊಸತೆಲೆಮಾರಿನ ಜನಪದ ವಿದ್ವಾಂಸರಲ್ಲಿ ಡಾ.ಪ್ರಕಾಶ ಖಾಡೆ,ಡಾ.ವಿರೇಶ ಬಡಿಗೇರ ಹಾಗೂ ಡಾ.ಅಶೋಕ ನರೋಡೆ ಮುಖ್ಯರು
.ಬಾಗಲಕೋಟೆಯಲ್ಲಿ ನೆಲೆಸಿರುವ ಡಾ.ಪ್ರಕಾಶ ಖಾಡೆಯವರು ತಂದೆಯ ಜಾನಪದ ಕಾಯಕವನ್ನು ಮುಂದುವರಿಸಿದ್ದಾರೆ.ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿರುವ 'ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ',ಕೃಷ್ಣಾತೀರದ ಜನಪದ ಒಗಟುಗಳು,ಜನಪದ ಕೋಗಿಲೆ ಗೌರಮ್ಮ ಚಲವಾದಿ,

ನೆಲಮೂಲ ಸಂಸ್ಕøತಿ.ಜಾನಪದ ಹೆಬ್ಬಾಗಿಲು. ಬಾಗಲಕೋಟ ಜಿಲ್ಲೆಯ ಜನಪದ ಹಾಡುಗಳು,ಜಾನಪದ ಲೋಕ ಇವರ ಪ್ರಕಟಿತ ಜನಪದ ಕೃತಿಗಳು.ಹಂಪಿ ವಿ.ವಿ.ಪ್ರಾಧ್ಯಾಪಕರಾದ ಡಾ.ವಿರೇಶ ಬಡಿಗೇರ ಬಾಗಲಕೋಟ ತಾಲೂಕಿನ ಬೆಣ್ಣುರ ಗ್ರಾಮದವರು.ಉತ್ತರ ಕರ್ನಾಟಕದ ಜನಪದ ಗೀತ ಮೇಳಗಲು,ರಾಶಿ ಬುತ್ತಿ,ಅಡಿಗಲ್ಲು,ಹಳೆಲಾವಣಿಗಳು,ಗುಳ್ಳವ್ವ ಆಚರಣೆ,ಹಾಗೂ ಸಂಸ್ಕøತಿ ಸಂರಚನೆ ಇವರ ಜನಪದ ಕೃತಿಗಳು.ಡಾ.ಅಶೋಕ ನರೋಡೆಯವರ 'ಗೋಸಾಯಿಗಳು ಒಂದು ಜನಾಂಗೀಯ ಅಧ್ಯಯನ,ಉತ್ತರ ಕರ್ನಾಟಕದ ಗೀ ಗೀ ಮೇಳಗಳು.ಜಾನಪದ ಜಗತ್ತಿಗೆ ಅಗಸೀ ಬಾಗಿಲು,ಕೌಜಲಗಿ ನಿಂಗಮ್ಮ ಇವರ ಜನಪದ ಕೃತಿಗಳು,ಬೀರಪ್ಪ ಹಳಮನಿ ಅವರ ಡೊಳ್ಳನ ಪದಗಳು,ಡಾ.ಬಿ.ಆರ್ ಪೋಲಿಸ ಪಾಟೀಲ ಅವರ ಲಾವಣಿಗಳು,ಮೊದಲಾದವು ಬಾಗಲಕೋಟ ಜಿಲ್ಲೆಯ ಜನಪದ ಸಾಹಿತ್ಯದ ಕೃತಿ ರತ್ನಗಳಾಗಿವೆ.

ಕಲಾ ಶ್ರೀಮಂತಿಕೆ ;
ಬಾಗಲಕೋಟ ಜಿಲ್ಲೆಯು ಜನಪದ ಕಲೆಗಳ ತವರುಮನೆ ಎನಿಸಿದೆ.ಇಲ್ಲಿ ಪ್ರತಿ ಊರಿಗೆ ಒಂದು ಭಜನಾ ಮೇಳ,ಡೊಳ್ಳಿನ ಮೇಳ,ಕರಡಿ ಮಜಲು ಕಾಣಸಿಗುತ್ತವೆ.ಸೋಬಾನೆ ಪದಗಳನ್ನು,ಬೀಸುವ ಪದಗಳನ್ನು ಹಾಡುವ ತಾಯಂದಿರು ಪ್ರತಿ ಹಳ್ಳಿಗಳಲ್ಲಿದ್ದಾರೆ.ಜಿಲ್ಲೆಯ ಶ್ರೀಮಂತ ಜನಪದ ಕಲೆ ಶ್ರೀ ಕೃಷ್ಣಪಾರಿಜಾತ.ಪಾರಿಜಾತದಲ್ಲಿ ಕೌಜಲಗಿ ನಿಂಗಮ್ಮ,ಕೃಷ್ಣಾಜಿ ದೇಶಪಾಂಡೆ,ಅಪ್ಪಾಲಾಲ ನಧಾಪ,ಬರಗಿ ರಾಚಯ್ಯ, ಟಕ್ಕಳಕಿ ವಿಠ್ಠಲರಾವ,ಸೂಳಿಕೇರಿ ಯಮೂನಾಬಾಯಿ,

                                                      ಪಾರಿಜಾತ ಕಲಾವಿದೆ ನಾಡೋಜ ಯಲ್ಲವ್ವ
ಯಲ್ಲವ್ವ ರೊಡ್ಡಪ್ಪನವರ,ಕಾಶಿಬಾಯಿ ದಾದನಟ್ಟಿ,ಮೊದಲಾದವರು ಖ್ಯಾತನಾಮರು.ಗೊಂದಲಿಗರ ಕಲೆಯಲ್ಲಿ ಬಾಗಲಕೋಟೆಯ ಸುಗತೇಕರ ಕುಟುಂಬದವರು ಜನಪ್ರಿಯರು.ಹುನಗುಂದ ತಾಲೂಕಿನ ಕೋಡಿಹಾಳ, ಮುಧೋಳ ತಾಲೂಕಿನ ಲೋಕಾಪುರಗಳಲ್ಲಿ ಬುಡಬುಡಕಿ ಕಲೆಯ ಕಲೆಗಾರಿದ್ದಾರೆ.ಬಾದಾಮಿ ತಾಲೂಕಿನ ಕರಡಿಗುಡ್ಡದಲ್ಲಿ ಕಿಳ್ಳೆ ಕ್ಯಾತ ಕಲಾವಿದರು ಉಳಿದುಕೊಂಡಿದ್ದಾರೆ.ದುರಗ ಮುರಗಿ ಅಲೆಮಾರಿ ಜನಾಂಗದವರು ಜಿಲ್ಲೆಯಲ್ಲಿ ಕಾಣಸಿಗುತ್ತಾರೆ.ಬಾದಾಮಿ ತಾಲೂಕಿನ ಕುಟಕನಕೇರಿ,ಕೆಂದೂರಗಳಲ್ಲಿ ಮೋಡಿ ಆಟದ ಮನೆತನಗಳು ಮೋಡಿ ಆಟದ ಕಲೆಯನ್ನು ಉಳಿಸಿಕೊಂಡು ಬಂದಿದ್ದಾರೆ.ಪ್ರಸಿದ್ದ ಬಾಗಲಕೋಟೆಯ ಹೋಳಿ ಆಚರಣೆಯಲ್ಲಿ ಹಲಗೆ ನುಡಿಸುವ ತಂಡಗಳಿವೆ.ಮಹಾಲಿಂಗಪುರದ ಕರಡಿ ಮನೆತನ ಕರಡಿ ವಾದನಕ್ಕೆ ರಾಷ್ಟ ಖ್ಯಾತಿ ಪಡೆದಿದೆ.ಜಿಲ್ಲೆಯ ತುಂಬೆಲ್ಲ ಜನಪದ ಕಲೆಯ ಸೊಬಗು ಚೆಲ್ಲುವರಿದಿದೆ.ಆದರೆ ಆಧುನಿಕತೆಯ ಈ ಸಂದರ್ಭದಲ್ಲಿ ಜಿಲ್ಲೆಯ ಅನೇಕ ಜನಪದ ಕಲೆಗಳು ಮರೆಯಾಗುತ್ತಿವೆ, ಕಲಾವಿದರು ಪ್ರೋತ್ಸಾಹವಿಲ್ಲದೆ ಸೊರಗುತ್ತಿದ್ದಾರೆ.
-------------------------------------------------------------------
Dr.Prakash G.Khade,Navanagar,Bagalkot-587103, Cell-9845500890

Sunday, 18 August 2013

ಕನ್ನಡ ಲಾವಣಿ ಸಾಹಿತ್ಯ-ಡಾ.ಖಾಡೆ

 ವಿಶೇಷ ಲೇಖನ :

                                                          ಕನ್ನಡ ಲಾವಣಿ ಸಾಹಿತ್ಯ

                                                         -ಡಾ.ಪ್ರಕಾಶ ಗ.ಖಾಡೆ
       
     ಕನ್ನಡ ಕಾವ್ಯಕ್ಕೆ ಜೀವ ಕಳೆ ತಂದ ಲಾವಣಿ ಪ್ರಧಾನವಾಗಿ ಶೃಂಗಾರ ಕಾವ್ಯ. ಕಾಲಾಂತರದಲ್ಲಿ ಅವುಗಳ ಜನಪ್ರಿಯತೆಯು ಸ್ಥಳೀಯ ಸಂದರ್ಭ ಮತ್ತು ಪರಿಸ್ಥಿತಿಗಳಿಗನುಗುಣವಾಗಿ ಬದಲಾದ ವಸ್ತುವಿಗೆ ಬಳಸಿಕೊಳ್ಳಬೇಕಾಯಿತು.ಮರಾಠಿ ಸಾಹಿತ್ಯದಲ್ಲಿ ಲಾವಣಿಗೆ ಹೆಚ್ಚು ಮೌಲಿಕತೆ ಪ್ರಾಪ್ತವಾಗಿದೆ. ಮರಾಠಿಯಿಂದ ಗುಳೇ ಬಂದು ‘ದಕ್ಷಿಣ ಮಹಾರಾಷ್ಟ್ರ’ವೇ ಆಗಿದ್ದ ಉತ್ತರ ಕರ್ನಾಟಕದ ಗಡಿಯಲ್ಲಿ ಲಾವಣಿಯ ಲಾವಣ್ಯ ರಸಬಳ್ಳಿಯಂತೆ ಹಬ್ಬಿದೆ. ‘‘ಮರಾಠಿ ಮತ್ತು ಕನ್ನಡ ಸಾಹಿತ್ಯದ ಆದಾನ ಪ್ರದಾನದ ಮಹತ್ವದ ಕೊಂಡಿ ಲಾವಣಿ ಸಾಹಿತ್ಯ’’ ಎನ್ನುತ್ತಾರೆ ವಾಮನ ಬೇಂದ್ರೆಯವರು. ಸರ್ವ ಸಾಮಾನ್ಯ ಜನತೆಯ ಮನೋರಂಜನೆಗಾಗಿ ಜನತೆಗೆ ಹಿಡಿಸುವಂತೆ ಲೌಕಿಕ, ಪೌರಾಣಿಕ ಮತ್ತು ಆಧ್ಯಾತ್ಮಿಕ ವಿಷಯಗಳ ಮೇಲೆ ರಚಿಸಿದ ಕಥೆ, ಡೋಲಕದ ತಾಳ ಹಿಡಿದು, ವಿಶಿಷ್ಟ ರೀತಿಯಲ್ಲಿ ಹಾಡುವ ವಿಶೇಷ ಪದ್ದತಿಯ, ಹಾಡಲು ಸರಳತೆಯನ್ನೊಳಗೊಂಡ ಪದ್ಮಾವರ್ತನೀ ಎಂಟು ಮಾತ್ರೆಗಳ ಆವರ್ತನೆ  ಮತ್ತು ಭೃಂಗಾವರ್ತನೀ ಆರು ಮಾತ್ರೆಗಳ ಆವರ್ತನ ಉಳ್ಳ ರಚನೆಗಳೇ ಲಾವಣಿಗಳು ಎಂಬ ನಿರ್ಣಯವನ್ನು ಮರಾಠಿ ಸಾಹಿತ್ಯ ವಿಮರ್ಶಕರು ನಮೂದು ಮಾಡಿದ್ದಾರೆ.
   ಪೇಶವೆ ಕಾಲದ ಅನಂತರದಲ್ಲಿ 19 ಮತ್ತು 20ನೆಯ ಶತಮಾನಗಳಲ್ಲಿ ಮರಾಠಿ ಮತ್ತು ಕನ್ನಡ ಲಾವಣಿ ಸಾಹಿತ್ಯಕ್ಕೆ ರಾಜಕೀಯ ಮತ್ತು ಸಾಮಾಜಿಕ ಸ್ವರೂಪ, ವೈವಿಧ್ಯ ಪ್ರಾಪ್ತವಾಯಿತು. ಭಾರತ ಸ್ವಾತಂತ್ರ್ಯ ಆಂದೋಲನ ಮತ್ತು ಸ್ವಾತಂತ್ರ್ಯೋತ್ತರ ಕಾಲದಲ್ಲಿ ಯೋಜನೆಗಳ ಪ್ರಚಾರಕ್ಕೆ ಬಹುವಾಗಿ ಬಳಕೆಯಾಯಿತು.
ಸರಸೋತಿ ನಿಮ್ಮ ಸ್ತುತಿ
ಸಬಾದಾಗ ಬಂದ ನಿಂತ  ನಾ ನಾಗೇಶಿ
ಚರಣಕ್ಕೆರಗಿ ಕರುಣ ಮಾಡಿ ಕೈ ಮುಗದ
ಕಾಯ ಒಡಿತೇವ ನಾವು ನಮಸ್ಕರಿಸಿ
 ಶಬ್ದಸೃಷ್ಟಿಯ ಸರಸ್ವತಿಯನ್ನು ಕೈ ಮುಗಿದು ತಮ್ಮ ನಾಲುಗೆಯ ನುಡಿ ಸಾಲುಗಳಿಗೆ ಆಹ್ವಾನಿಸಿಕೊಳ್ಳುವ ಜನಪದರು ದೈವದಲ್ಲಿ ಇಟ್ಟ ನಂಬುಗೆಯಿಂದ ಸದಾ ಜಾಗೃತ ಮತ್ತು ಪವಿತ್ರ ನೆಲೆಯನ್ನು ತಮ್ಮ ಪರಿಸರದಲ್ಲಿ ಕಟ್ಟಿಕೊಳ್ಳುತ್ತಾರೆ.  ಲಾವಣಿಗಳು ತೀರಾ ಆಪ್ತವಾಗುವುದು ಅವುಗಳ ಕಾವ್ಯ ಸೌಂದರ್ಯ ಮತ್ತು ಜನರಾಡುವ ಮಾತಿನ ಕಾವ್ಯ ಶಕ್ತಿಯಿಂದ. ವಾಸ್ತವ ಬದುಕಿನ ಹಲವಾರು ಮಜಲುಗಳನ್ನು ಇವು ತೆರೆದಿಡುತ್ತವೆ. ತನ್ನ ಗಂಬಿsೀರತೆ, ಶೃಂಗಾರ, ಟೀಕೆ, ಮೊನಚಾದ ಪ್ರತಿಕ್ರಿಯೆಗಳಿಂದ ನೀತಿ ಬೋಧನೆಯನ್ನು ಪ್ರಧಾನವಾಗಿಸಿಕೊಂಡಿವೆ.
ಈ ಮನಾ ಅಂಬೂದು ಉಡಾಳ ದನಾ ಹಾಕ ಮುಗದಾನಾ
ಹಗ್ಗಾ ಹಿಡಿ ಜಗ್ಗಿ ಅದು ನಡೂತೈತಿ ತಲೆಬಾಗಿ
ಸಡ್ಲ ಬಿಟ್ಟಿಂದ ಜಿಗದಾಡತೈತಿ ಟುಣ ಟುಣಾ ಅಡ್ನಾಡ ಅವಗುಣಾ
ಅಸ್ಕೋತೈತಿ ಹೋಗಿ ಕೆಡವಿತ ನಿನ್ನ ಯಮಬಾದಿನಿ
ಹರಿದಾಡುವ ಮನಸ್ಸಿಗೆ ಮುಗದಾನ ಹಾಕಿ ಕಟ್ಟಿ ಬದುಕು ರೂಪಿಸಿಕೊಳ್ಳಬೇಕೆಂದು ನೀತಿಯನ್ನು ಸಾರುವ ಲಾವಣಿಕಾರರು ತಮ್ಮ ಸ್ಥಳೀಯ, ತಾವು ಕಂಡ ಪರಿಸರದ ವಸ್ತು ಸಂಗತಿಗಳಿಂದಲೇ ಕಾವ್ಯದ ಸೆಳಕುಗಳನ್ನು  ನೀಡುತ್ತಾರೆ.
    ಲಾವಣಿಕಾರರ ಕಾವ್ಯಶ್ರೇಷ್ಠತೆ ಇರುವುದು ಅವರು ಸ್ಥಳೀಯವಾಗಿ ದೊರಕಿಸಿಕೊಳ್ಳುವ  ಉದಾಹರಣೆಗಳಲ್ಲಿ. ಅತಿ ರಂಜಿತವಲ್ಲ, ಅತಿ ಬಿಗುವಲ್ಲದ ಮತ್ತು ಹಾಗೆಂದು ತೋರುಗೊಡುವ ಪದಪುಂಜಗಳನ್ನೂ ಸನಿಹಕ್ಕೂ ತರಸಿಕೊಳ್ಳದೆ ತಾನು ಕಂಡ ಪರಿಸರ ಸಾಮಗ್ರಿಯನ್ನು ಎತ್ತಿಕೊಳ್ಳುವುದು ಅವರ ವಿಶೇಷತೆ. ರಾಮ, ಲಕ್ಷ್ಮಣ, ಸೀತೆಯರ ವನವಾಸ ಪ್ರಸಂಗ ಚಿತ್ರಿತವಾಗಿರುವುದನ್ನು ಗಮನಿಸಿದಾಗ ಈ ಮಾತು ಇನ್ನೂ ಸ್ಪಷ್ಟವಾಗುತ್ತದೆ.
ಕಲ್ಲನಾರ ಮಡಿಯನುಟ್ಟ ಹುಲ್ಲ ಹಾಂವ ಚೇಳಿನಾಗ
ಜಲ್ಲಹತ್ತಿ ತಿರಗತಾರ ಬರಿಗಾಲಾ
ಹುಣಚಿ ಹುಲ್ಲ ಬೀಜ ತಿಂಬತಾರ ಹೆಂತಾಕಾಲಾ
ಕಾರಿಕಾಯಿ ಬಾರಿಕಾಯಿಗಳ ಹಣ ಹಂಪಲಾ
ಮನಿಯಿಲ್ಲ ಮಾರಯಿಲ್ಲ ತೋಸಿಕೊಂಡ ಒಣಗತಾರ
ಆರತಿಂಗಳಗಟ್ಲೆ ಥಂಡಿ ಮಳಿಗಾಲಾ ಬಾಸಿಗಿ ಬಿಸಿಲಾ
ಇಲ್ಲಿ ಬಳಸಿರುವ ಕಲ್ಲನಾಗರ, ಬರಿಗಾಲ, ಹುಣಚಿಬೀಜ, ಕಾರಿಕಾಯಿ, ಬಾರಿಕಾಯಿ ‘ಮನಿಯಿಲ್ಲ ಮಾರಯಿಲ್ಲ’ ‘ತೋಸಿಗೊಂಡ ಒಣಗತಾರ’ ಥಂಡಿ.... ಹೀಗೆ ಪ್ರತಿ ಸಾಲಿನಲ್ಲಿ ಬಳಕೆಯಾದ ಆಡುಮಾತಿನ  ಗಟ್ಟಿತನದ ಪದಗಳು ಜನಪದರ ದೇಸೀ ಕಾವ್ಯದ ಭಾಷಾಸತ್ವವನ್ನು ನಿರೂಪಿಸುತ್ತವೆ.
ಚರಿತ್ರೆ
 ಸಮಕಾಲೀನ ಸಂಗತಿ ಮತ್ತು ಚಾರಿತ್ರಿಕ ಅಂಶಗಳನ್ನು ಒಳಗೊಂಡ ಲಾವಣಿಗೀತ ಪ್ರಕಾರವು ಕನ್ನಡದ ಇತಿಹಾಸವನ್ನು ಕಟ್ಟಿಕೊಡುವ ಮೂಲಕ ಪರಂಪರೆಯ ಶ್ರೇಷ್ಠ ದಾಖಲೆಗಳೆನಿಸಿವೆ. 1897ರಲ್ಲಿ ಭಾರತಕ್ಕೆ ಬಂದ ಜಾನ್ ಫೇತ್‍ಪುಲ್ ಪಿs್ಲೀಟರು ಬಂದ ಒಂದೆರಡು ವರ್ಷಗಳಲ್ಲಿಯೇ ಉತ್ತರ ಕರ್ನಾಟಕದಲ್ಲಿ ಆಡಳಿತಾದಿsಕಾರ ವಹಿಸಿಕೊಂಡು ಕನ್ನಡ ಕಲಿತು, ಆ ಕಾಲಕ್ಕೆ ಜನಪದರಲ್ಲಿ ಹಾಡಿಕೊಂಡು ಬಂದ ಲಾವಣಿಗಳಿಗೆ ಮನಸೋತು ಅವುಗಳ ಸಂಗ್ರಹಕ್ಕೆ ನಿಂತ ಕಾರಣವಾಗಿ ಬ್ರಿಟಿಷರ ವಿರುದ್ಧ ದೇಸೀಯರು ತೋರಿದ ಪ್ರತಿಕ್ರಿಯೆಯ ಚಳವಳಿ ಪ್ರಕಟವಾಗುವಂತಾಯಿತು. ಸಂಗೊಳ್ಳಿ ರಾಯಣ್ಣ, ಹಲಗಲಿ ಬೇಡರು ಐತಿಹಾಸಿಕ ವೀರರಾಗಿ ಚಿತ್ರಿಸಿದ ಇಂಥ ಚಾರಿತ್ರಿಕ ಲಾವಣಿಗಳು. ನಿಶ್ಯಸ್ತ್ರೀಕರಣ ಕಾಯಿದೆ, ದತ್ತು ಮಕ್ಕಳಿಗೆ ಹಕ್ಕಿಲ್ಲ ಕಾಯಿದೆ, ಆದಾಯ ತೆರಿಗೆ ವಿರುದ್ಧ ನಡೆದ  ಬಂಡಾಯವನ್ನು ಚಿತ್ರಿಸಿದರು. ಜೊತೆಗೆ ವಸಾಹತುಶಾಹಿ ಸ್ಥಳೀಯ ಸಂಸ್ಕøತಿಯ ಮೇಲೆ ಉಂಟುಮಾಡಿದ ಬಹುದೊಡ್ಡ ಅನ್ಯಾಕ್ರಮಣವನ್ನೂ ಕಂಡಂತೆ ಹಾಡಿ ತೋರಿಸಿದವು. ಬಾದಾಮಿ ಕೋಟೆಯನ್ನು ‘ಕುಂಪಣಿ’ಯವರು ಕೆಡವಿಸಿದ್ದರ ವಸ್ತುವನ್ನೊಳಗೊಂಡ ಪಿs್ಲೀಟರು ಸಂಗ್ರಹಿಸಿದ ಒಂದು ಪದ ಹೀಗಿದೆ:
ಕುಂಪಣಿಯವರು ಮಾಡ್ಯಾರ ಸಂವಾರ
ನಾಡಮೇಗಿನ ಜನಾ ಮರುಗಿತೋ ಮರಮರಾ
ಸರಕಾರ ಬಂದು ಕೆಡವಿದ ಮೇಲೆ ಯಾರಿಲ್ಲ ಈ ಧರಾ
ಕಳಸ ಇಲ್ಲದಾ ತೇರಿನ ಗತಿ ಬದಾಮಿ ಶೃಂಗಾರಾ
ಕರ್ನಾಟಕ ಪ್ರಾಂತಕ್ಕ ಆಧಾರ ಇತ್ತ ಈ ಗಡಾ
ಬಡಕೊಂಡು ಹೋದರೂ ಕೇಳವರ್ಯಾರಿಲ್ಲ ನಾಡಾ
ಬ್ರಿಟಿಷರು ನಮ್ಮ ನಾಡನ್ನು ಅದೆಂತು ಆಕ್ರಮಿಸಿಕೊಂಡರು ಎಂಬುದನ್ನು ಬಿಡಿಸಿಡುವ ಈ ಬಗೆಯ ಲಾವಣಿಗಳು ಚರಿತ್ರೆಯನ್ನು ಬಿಚ್ಚಿಡುವಲ್ಲಿ ಪ್ರಧಾನ ದಾಖಲೆಗಳಾದವು. ಸಂಗೊಳ್ಳಿ ರಾಯಣ್ಣ, ಆದಾಯ ತೆರಿಗೆ, ಹಲಗಲಿಯ ಬೇಡರು, ಕಿತ್ತೂರ ಚೆನ್ನವ್ವನ ಸೊಸೆ, ಲಾವಣಿ ಪದಾ, ಬಾದಾಮಿ ಕಿಲೆ ಕೆಡವಿದ ಪದಾ, ಇಂಗ್ರೇಜಿ ಸಂಸ್ಥಾನದ ಮೇಲಿನ ಪದಾ ಮೊದಲಾದ ಲಾವಣಿಗಳನ್ನು ಗಮನಿಸಿದಾಗ ಅಲ್ಲಿ ಕನ್ನಡ ದೇಸೀ ಚಳವಳಿಗಾರರ ದಿಟ್ಟತನ, ಪರಕೀಯರ ಕುತಂತ್ರ, ಸ್ಥಳೀಯರ ರೋಷ ಎಲ್ಲವನ್ನು ಪದಕಟ್ಟಿ ಹಾಡುವಲ್ಲಿ ಲಾವಣಿಕಾರರು ಆಗ ಇದ್ದ ಅದಿsಕಾರಿಶಾಹಿಯ ವಿರುದ್ಧವೇ ಬಂಡೆದ್ದು ಹಾಡಿದ್ದೂ ಒಂದು ದಾಖಲಾದ ಸಂಗತಿಯಾಗುತ್ತದೆ.
        ಜನರ ನೆಮ್ಮದಿಯ ಹತಗೊಳಿಸಿ ಕುತಂತ್ರದಿಂದ ತಂದ ಅನೇಕ ಕಾಯಿದೆಗಳು ಲಾವಣಿಕಾರರ ರೋಷಕ್ಕೆ ಕಾರಣವಾದವು. ಒಂದು ಬಗೆಯಲ್ಲಿ ಜನಸಮೂಹವನ್ನು ಬ್ರಿಟಿಷ್ ವಿರೋದಿs ನೆಲೆಯಲ್ಲಿ ಸಜ್ಜುಗೊಳಿಸಲು ಸ್ಥಳೀಯ ಈ ಹಾಡುಗಾರರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಸಿಡಿದೆದ್ದ ಕಿಡಿಗಳಾಗುತ್ತಾರೆ. ‘ಆದಾಯ ತೆರಿಗೆ’ ಉಂಟುಮಾಡಿದ ಶೋಷಣೆಯನ್ನು ‘ಏನ ಹೇಳಲಿ ಜನ್ಮದ ಗೋಳಾ ಇಂಗ್ರಜಿ ಉಪದರ ಆದೀತ ಭಾಳಾ. ಬಡವರ ಅಳತಾರೊ ಗಳಗಳಾ ಮಾಡತಾರ ಚಿಂತಿ’ ಎಂದು ಚಿತ್ರಿಸಿದರು. ಈ ಚಿತ್ರಣದಲ್ಲಿ ‘ಬ್ರಿಟಿಷರ ದಬ್ಬಾಳಿಕೆಯ ಮತ್ತೊಂದು ಕ್ರೂರನೋಟ ಇಲ್ಲಿದೆ. ಹೀಗೆ ಸ್ಥಳೀಯ ತಲ್ಲಣ, ಕರ್ಷಣಗಳನ್ನು ಈ ಬಗೆಯಲ್ಲಿ ಕಾವ್ಯದಲ್ಲಿ ಕಟ್ಟಿಕೊಡುವ ಲಾವಣಿಕಾರರು ಮುಖ್ಯವಾಗಿ ಚರಿತ್ರಕಾರರ ಸಾಲಿನಲ್ಲಿ ನಿಂತು ತಮ್ಮ ಕಾವ್ಯದ ಸಾರ್ಥಕತೆಯನ್ನು ತೋರ್ಪಡಿಸುವುದು ಕಾಣುತ್ತೇವೆ.
ಹುಲಕುಂದ ಲಾವಣಿಕಾರರು
  ಲಾವಣಿ ಕಾವ್ಯ ಪ್ರಕಾರ ಶೃಂಗಾರ ಚಾರಿತ್ರಿಕ ನೆಲೆಯಲ್ಲಿ ಹರಿದು ಬರುತ್ತಿರಬೇಕಾದರೆ ಬ್ರಿಟಿಷರ ದಬ್ಬಾಳಿಕೆ, ಅದಿsಕಾರಶಾಹಿ ವ್ಯವಸ್ಥೆಗೆ ಒಂದು ಬಹುದೊಡ್ಡ ಆಂದೋಲನವಾಗಿ ರೂಪುಗೊಂಡ ‘ಭಾರತ ಸ್ವಾತಂತ್ರ್ಯ ಚಳವಳಿ’ಗೆ ರಾಷ್ಟ್ರೀಯವಾದಿ ಗೀತೆಗಳನ್ನು ರಚಿಸಿ ತಂಡ ಕಟ್ಟಿ ಹಾಡಿದರು. ಭಾರತ ಸ್ವಾತಂತ್ರ್ಯ ಚಳವಳಿ ನಗರದ ವಿದ್ಯಾವಂತರ ಕೆಲವೇ ಕೆಲವರ ಧ್ವನಿಯಾಗಿದ್ದ ಸಂದರ್ಭದಲ್ಲಿ ಈ ಚಳವಳಿಯನ್ನು ಜನಮುಖಿಯಾಗಿಸಲು ಆ ಕಾಲಕ್ಕೆ ತೀವ್ರವಾಗಿ ಆಕರ್ಷಿಸಿದ್ದು ಲಾವಣಿ ಸಾಹಿತ್ಯ. ಲಾವಣಿ ಗೀಗಿ ಪ್ರಕ್ರಿಯೆ ತಂಡಗಳನ್ನು ಹುಟ್ಟು ಹಾಕಿದವು. ಆ ಕಾಲದ ಸ್ವಾತಂತ್ರ್ಯ ಹೋರಾಟದ ನೇತಾರರಿಗೆ ಜೊತೆಯಾಗಿ ನಿಂತವರು ನಮ್ಮ ದೇಸೀ ಕಾವ್ಯ ಪ್ರಭುಗಳು 1930ನೇ ಇಸ್ವಿಯ ಜನೇವರಿ 29ನೇ ತಾರೀಖಿಗೆ ಹುಲಕುಂದಕ್ಕೆ ಬಂದ ವೆಂಕಟರೆಡ್ಡಿ ಹೂಲಿ, ವಾಮನರಾವ್ ಬಿದರಿ ಅವರು ಲಾವಣಿಕಾರರಿಗೆ ಗಾಂದಿsೀಜಿ ವಿಚಾರಗಳನ್ನು ತಿಳಿಸಿ ವಿಧಾಯಕ ಕಾರ್ಯಕ್ರಮಗಳ ಪ್ರಚಾರ ಮಾಡುವಂತೆ ಹುರಿದುಂಬಿಸಿದರು. ಇದರ ಪರಿಣಾಮವಾಗಿ ಹುಲಕುಂದ ಭೀಮಕವಿ ಎಂದೇ ಹೆಸರಾದ ಹುಲಕುಂದದ ಬಸಪ್ಪ ಸಂಗಪ್ಪ ಬೆಟಗೇರಿ ಹಾಗೂ ಹನುಮಪ್ಪ ಬಸಪ್ಪ ಮಿರ್ಜಿ, ಹುಲಕುಂದ ಪಟ್ಟದೇವರು (ಶಿವಲಿಂಗ ಕವಿ) ಸಿದ್ದರಾಯ, ಗಿರಿಮಲ್ಲ, ಸಂಗಯ್ಯ ಮುಂತಾದವರು ರಾಷ್ಟ್ರೀಯ ಪದಗಳನ್ನು ರಚಿಸಿದರು. ಅದೇ ಗ್ರಾಮದ ಗೀಗೀ ಮೇಳ ತಯಾರಾಯಿತು. ‘ಅಝಾದ ಹಿಂದ ಗೀಗೀ ಮೇಳ’ ಎಂಬ ಹೆಸರಿನ ಈ ಮೇಳವು ರಾಷ್ಟ್ರೀಯ ವಿಚಾರಗಳ ಪ್ರಚಾರಕ್ಕಾಗಿ ಕಂಕಣ ಬದ್ದವಾಯಿತು. ಬೆಳಗಾಂವಿ, ಧಾರವಾಡ, ವಿಜಾಪುರ, ಬಳ್ಳಾರಿ, ಕಾರವಾರ, ಸೊಲ್ಲಾಪುರ ಜಿಲ್ಲೆಗಳಲ್ಲಿ ಸಂಚರಿಸಿತು. ಹೀಗೆ ಸ್ವತಂತ್ರ ಮೇಳಗಳು ತಲೆ ಎತ್ತುವ ಮೂಲಕ ಲಾವಣಿ ಗೀತ ಸಾಹಿತ್ಯ ತನ್ನ ವ್ಯಾಪಕತೆಯನ್ನು ಪಡೆದುಕೊಂಡಿತು.
   ನಾನಾ ಮುಖಗಳಿದ್ದ ರಾಷ್ಟ್ರೀಯ ಚಳವಳಿಗೆ ಜನ ಸಾಮಾನ್ಯರನ್ನು ಸಜ್ಜುಗೊಳಿಸಲು ಈ ಲಾವಣಿಕಾರರು ಮುಂದಾಗಿರವದು ಕಂಡು ಬರುತ್ತದೆ. ಇಷ್ಟಲ್ಲದೆ ಅಸ್ಪ್ನೃಶ್ಯತಾ ನಿವಾರಣೆ, ಮದ್ಯಪಾನ ನಿಷೇಧ, ಖಾದಿ ಧರಿಸುವುದು ಇತ್ಯಾದಿ ಸಂಗತಿಗಳನ್ನು ಹಳ್ಳಿಗರಿಗೆ ಮನವರಿಕೆಯಾಗುವಂತೆ ತಿಳಿಸುವಲ್ಲಿ ತಮ್ಮ ಕಾವ್ಯ ಕುಶಲತೆ ಮೆರೆದರು. ಈ ಕಾರ್ಯದಲ್ಲಿ ಕನ್ನಡದಲ್ಲಿ ಅನೇಕ ಲಾವಣಿಕಾರರು ತಮ್ಮ ಹೆಸರು, ಕೀರ್ತಿಗೆ ಆಸೆ ಮಾಡದೆ ಕಾವ್ಯ ಕಟ್ಟಿ ಹಾಡಿದರು. ತೇರದಾಳ ತುಕಾರಾಮ, ಗೋಪಾಳ ದುರದುಂಡಿ, ಮುರಗೋಡ ಕುಬ್ಬಣ್ಣ, ಹುಲಕುಂದ ಬಿsೀಮಕವಿ, ಬಡಚಿ ಲಕ್ಷ್ಮಿಬಾಯಿ, ತುಂಗಳ ಸತ್ಯಪ್ಪ, ಪರಮಾನಂದವಾಡಿ ಮುಲ್ಲಾ, ಕುಡಚಿ ಮಲ್ಲಪ್ಪ, ಕುರ್ತಕೋಟಿ ಕಲ್ಮೇಶ, ಅಪ್ಪಾಜಿರಾವ ಮಹಾರಾಜ ಸರಕಾರ, ಪ್ರಭು, ಬಾಳಗೋಪಾಲ, ಬಿsೀಮಸಿಂಗ, ಯೋಗಣ್ಣ, ರಾಣು ಕುಂಬಣ್ಣಾ, ಶಾಹೀರ ಭೈರಿನಾಯ್ಕ ವಸ್ತಾದಿ ಖಾಜಾಬಾಯಿ ಹನುಮಂತ, ಹುಚಮಲ್ಲಯ್ಯ, ಸಂಗಣ್ಣ ಬಸಣ್ಣ, ಸಂಗಯ್ಯ ಕರಾಡಗೆ, ಸಾತುರಾಮ, ಸಿದ್ದರಾಮ ಮುಂತಾದವರು ದೇಸೀಕಾವ್ಯವನ್ನು ಕಟ್ಟಿ ಹಾಡಿ  ಹೆಸರಾದರು.
     18 ಮತ್ತು 19ನೆಯ ಶತಮಾನದಲ್ಲಿ ಉರ್ದು, ಮರಾಠಿ ಪ್ರಾಬಲ್ಯದ ಕನ್ನಡ ಪ್ರದೇಶದಲ್ಲಿ ಮುಸ್ಲಿಂ ತತ್ತ್ವಪದಕಾರರು ಕನ್ನಡ ತತ್ತ್ವಪದ ಸಾಹಿತ್ಯಕ್ಕೆ ಸಮೃದ್ಧತೆ ತಂದಂತೆ ಕನ್ನಡ ಲಾವಣಿ ಕವಿತೆಗಳನ್ನು ಕಟ್ಟಿ ಹೆಸರಾದುದು ಗಮನಾರ್ಹವಾಗಿದೆ. ‘ಉತ್ತರ ಕರ್ನಾಟಕದ ಸಾಮಾಜಿಕ ಸಂದರ್ಭದಲ್ಲಿ ಹಿಂದೂ ಮುಸ್ಲಿಂ ಬಾಂಧವ್ಯ ಗಮನಾರ್ಹವಾದುದು. ಮೊಹರಂ ಪದಗಳನ್ನು ರಚಿಸಿದ ಹಿಂದೂಗಳಿರುವಂತೆಯೇ ಲಾವಣಿ ಮತ್ತು ತತ್ತ್ವಪದಗಳನ್ನು ರಚಿಸಿರುವ ಮುಸ್ಲಿಂ ಕವಿಗಳಿದ್ದಾರೆ. ಈ ಕವಿಗಳು ಕನ್ನಡ ಭಾಷೆ ಮತ್ತು ವಿಷಯ ವಸ್ತುವಿನ ಮೇಲೆ ಗಳಿಸಿಕೊಂಡಿರುವ ಪ್ರೌಡಿsಮೆ ಆಗಾಧವಾದುದು. ವೇದಾಂತ ಪುರಾಣಗಳ ಬಗೆಗಿನ ನಿರರ್ಗಳ ನಿರೂಪಣೆ, ಸಮೃದ್ಧ ಪಾರಿಭಾಷಿಕ ಪದಗಳ ಬಳಕೆ ಅಚ್ಚರಿ ಮೂಡಿಸುವಂತಿವೆ ಎನ್ನುತ್ತಾರೆ ಡಾ.ಬಸವರಾಜ ಮಲಶೆಟ್ಟಿ ಅವರು. ಶಿಶುನಾಳ ಶರೀಫ(1840), ಬೀಬಿ ಇಂಗಳಗಿಯ ಶೇಕ  ಮಕ್ತಮಶಾ(1850), ಹಸನಸಾಬ(1858) ಮಂಗಲಗಿ ನನ್ನ ಸಾಹೇಬ(1874), ನರೋಣಾದ ಹೈದರಲಿ(1877), ಕೋರಳ್ಳಿಯ ಮೌಲಾಲಿ (1884), ಡೋಣುರದ ಬಸುಹಸನ(1888), ಯಾದವಾಡದ ಹುಸೇನಿ(1896), ಬೀಬಿ ಇಂಗಳಗಿಯ ಲಾಳೇಶ (1896) ಮಹಮ್ಮದ ಇಮಾಮಶಾ ರಾಣಿಬೆನ್ನೂರಿನ ಸಮ್ಮದ ಸಾಹೇಬ(1899), ಬಸವನ ಬಾಗೇವಾಡಿಯ ಚಾಂದ ಹುಸೇನಿ(1900), ದೇಗಾಂವದ ಇಮಾಮಸಾಹೇಬ(1906), ಚಾಂದಕವಟೆಯ ಗುಡಲಾಲ(1906), ಸಾವಳಗಿ ನಬೀಸಾಬ(1906) ಇಂಗಳೇಶ್ವರ ಲಾಲಸಾಬ(1922) ರಾಯಬಾಗದ  ಮೀರಾಸಾಹೇಬ(1922), ಹಲಸಂಗಿ ಖಾಜಾಬಾಯಿ(1924)... ಹೀಗೆ ಬೆಳವಲ ನಾಡಿನಲ್ಲಿ ಲಾವಣಿ ಕ್ಷೇತ್ರದಲ್ಲಿ ಹೆಸರಾದ ಈ  ಲಾವಣಿಕರರು ಕಾವ್ಯ ಸೃಷ್ಟಿಯಲ್ಲಿ ಗಮನಾರ್ಹ ಸಾಧನೆಯಿಂದ ಗುರುತಿಸಿಕೊಂಡಿರುತ್ತಾರೆ.
    ಆಧುನಿಕ ಕನ್ನಡ ಕಾವ್ಯವನ್ನು ರೂಪಿಸುವಲ್ಲಿ ಲಾವಣಿಗಳು ಮಹತ್ವದ ಪಾತ್ರವಹಿಸಿದವು. ಲಾವಣಿಗಳಲ್ಲಿನ ಕಲ್ಪನಾಶಕ್ತಿ, ಭಾವ ಸಂಪತ್ತು, ಲಯ ಪ್ರಾಸಗಳ ಗತ್ತು ಗಮ್ಮತ್ತು ನಮ್ಮ ಕವಿಗಳನ್ನು ಆಕರ್ಷಿಸಿತು. ಆ ಕಾಲಕ್ಕೆ ರೂಪಿತವಾದ ‘ಭಾವಗೀತ’ ಪ್ರಕಾರಕ್ಕೆ ಸರಿದೊರೆಯಾಗಿ ನಿಂತು ಲಾವಣಿಗಳು ತಮ್ಮ ಅಸ್ತಿತ್ವ ಪ್ರಕಟಿಸಿದವು. ಲಾವಣಿಗಳಿಗೂ ಭಾವಗೀತೆಗಳಿಗೂ ಸಂಬಂಧವುಂಟು. ರಗಳೆಯ ಲಯ, ಅಂಶೀ ಷಟ್ಪದಿ ಅನೇಕ ಲಾವಣಿ ಮತ್ತು ಭಾವಗೀತಗಳ ಜೀವಾಳ. ಆಧುನಿಕ ಮರಾಠಿ ಸಾಹಿತ್ಯದ ಭಾವಗೀತಕಾರರು ಲಾವಣಿಯ ಪ್ರೇರಣೆಯಿಂದ ಲಾವಣಿ ಧಾಟಿಯ ಭಾವಗೀತೆಗಳನ್ನು ರಚಿಸಿದಂತೆ ಬೆಟಗೇರಿ ಕೃಷ್ಣಶರ್ಮರು, ಮಧುರಚೆನ್ನ, ಬೇಂದ್ರೆ ಮತ್ತು ಶ್ರೀಧರ ಖಾನೋಳಕರ ಅವರು ಲಾವಣಿ ಗತ್ತಿನ ಅತ್ಯುತ್ತಮ ಭಾವಗೀತೆಗಳನ್ನು ರಚಿಸಿದ್ದಾರೆ. ಹೀಗೆ ಲಾವಣಿಕಾರರು, ಅನಂತರ ಭಾವಗೀತಕಾರರು ಮಾಡಿದ ರಚನೆಗಳು ಮೌಲಿಕವಾಗಿವೆ. ಹೀಗೆ ಹೊಸ ಕಾವ್ಯದ ಹುಟ್ಟಿಗೆ ಕಾರಣವಾದ ಲಾವಣಿ ಸಾಹಿತ್ಯ ಜನಸಾಮಾನ್ಯರ ನೆಲೆಯಿಂದ ಹೊರಟು ಕನ್ನಡ ಕಾವ್ಯ ಕ್ಷೇತ್ರವನ್ನು ಹೊಸ ಸಾಧ್ಯತೆಗಳೊಂದಿಗೆ ವಿಸ್ತರಿಸಿತು.
                                                       -ಡಾ.ಪ್ರಕಾಶ ಗ.ಖಾಡೆ
ವಿಳಾಸ: ಡಾ.ಪ್ರಕಾಶ ಗ.ಖಾಡೆ,ಸೆಕ್ಟರ್ ನಂ. 63,ನವನಗರ,ಬಾಗಲಕೋಟ  ,ಮೊ.9845500890

ಲಾವಣಿ ಸಾಹಿತ್ಯ


ವಿಜಯ ವಾಣಿ ವಿಜಯ ವಿಹಾರ 18.8.2013 ರಲ್ಲಿ ಪ್ರಕಟವಾದ ಲೇಖನ : ಲಾವಣಿ ಸಾಹಿತ್ಯ

Sunday, 19 May 2013

ಕನ್ನಡ ಜನಪದ ಒಗಟುಗಳು -ಡಾ.ಪ್ರಕಾಶ ಗ.ಖಾಡೆ




ಕನ್ನಡ ಜನಪದ ಒಗಟುಗಳು

ಡಾ.ಪ್ರಕಾಶ ಗ.ಖಾಡೆ
 ಭಾರತೀಯ ಸಂಸ್ಕೃತಿ ಪರಂಪರೆಯಲ್ಲಿ ಒಗಟು ಪ್ರಕಾರಕ್ಕೆ ವಿಶಿಷ್ಟ ಸ್ಥಾನವಿದೆ. ಇಂಗ್ಲೀಷಿನಲ್ಲಿ ಇದಕ್ಕೆ ‘ಖiಜಜಟe’ ಎಂದು ಹೆಸರಿದೆ. ಇದು ಹಳೆಯ ಇಂಗ್ಲೀಷಿನ ‘ಖಚಿeಜಚಿಟಿÀ’ ಪದದಿಂದ ಬಂದದ್ದು. ಇದರ ಅರ್ಥ ‘ಣo give ಚಿಜviಛಿe             ’ ಎಂದು. ಕನ್ನಡದಲ್ಲಿ ಒಗಟು, ಒಂಟು, ಒಡಪು, ಒಡಗತೆ ಮುಂತಾದ ಪದಗಳು ಬಳಕೆಯಲ್ಲಿವೆ. ಒಗೆ ಅಥವಾ ಎಸೆ   ಣo ಣhಡಿoತಿ ಎಂಬರ್ಥದಲ್ಲಿ ಒಗಟು, ಒಡೆ-ಒಡೆಸು, ಬಿಡಿಸು ಎಂಬರ್ಥದಲ್ಲಿ ಒಗಟು ಬಳಕೆಯಲ್ಲಿದೆ.

ಒಗಟು ಎಂದರೆ ಜಟಿಲವಾದದ್ದು, ಗೋಜಲು ಗೋಜಲಾದದ್ದು, ಗೂಢವಾದದ್ದು ಎಂದು ಅರ್ಥೈಸಲಾಗುತ್ತಿದೆ. ಒಗಟುಗಳು ಒಗಟುಗಳು ಬುದ್ಧಿ ಪ್ರಧಾನವಾದವುಗಳು. ಇವು ಸಾಮಾನ್ಯವಾಗಿ ಊಹೆಯ ಮೇಲೆ ಉತ್ತರವನ್ನು ಹುಡುಕುವ, ಕೇಳಿದ ಕೂಡಲೇ ದಿU್ಪ್ಭ್ರಮೆ ಹಿಡಿಸುವ, ರಹಸ್ಯಾರ್ಥವುಳ್ಳ ಪ್ರಶ್ನಾರ್ಥಕ ಹೇಳಿಕೆಗಳು. ಪ್ರತಿಯೊಂದರಲ್ಲೂ ಸಮಸ್ಯೆಯೊಂದಿದ್ದು ಸುಲಭವಾಗಿ ಬಿಡಿಸಲಾರದ ರೀತಿಯಲ್ಲಿ ಸಂಯೋಜಿತವಾಗಿರುತ್ತವೆ. ಇದರಲ್ಲಿ ಒಡ್ಡಿದ್ದು ಒಂದಿದ್ದರೆ, ಒಡೆಸುವುದು ಮತ್ತೊಂದು ಇರುತ್ತದೆ.

 “ಒಗಟು ಅತ್ಯಂತ ಪ್ರಾಚೀನವಾದ ಮತ್ತು ವ್ಯಾಪಕವಾದ ಸೂತ್ರೀಕೃತ ಆಲೋಚನಾ ಪ್ರಕಾರಗಳಲ್ಲಿ ಒಂದಾಗಿದ್ದು ಈ ವಿಷಯದಲ್ಲಿ ಪುರಾಣ, ನೀತಿಕಥೆ, ಜನಪದ ಕಥೆ ಮತ್ತು ಗಾದೆಗಳಿಗೆ ಇದು ಸಮಾನವಾಗಿದೆ. ಒಗಟುಗಳು ಮೂಲತಃ ರೂಪಕಗಳು. ಈ ರೂಪಕಗಳು ಮೂಲ ಮಾನಸಿಕ ಪ್ರಕ್ರಿಯೆಗಳಾದ ಸಂಯೋಜನೆ, ತುಲನೆ, ಹೋಲಿಕೆ ಮತ್ತು ಮೌನಗಳ ಗ್ರಹಿಕೆಯ ಫಲ.” ಒಗಟಿಗೆ ಹೆಚ್ಚು ಶಕ್ತಿಯನ್ನು, ಆಕರ್ಷಣೆಯನ್ನು ತಂದಿರುವುದೆಂದರೆ ಈ ರೂಪಕವೇ. “ಅಲಂಕಾರಿವಾದ ಒಗಟು ರೂಪಕದೊಡನೆ ಅತ್ಯಂತ ಸಂಬಂಧವನ್ನು ಒಳಗೊಂಡಿದೆ. ಒಂದು ದೃಷ್ಟಿಯಲ್ಲಿ ಒಗಟು ಹಾಸ್ಯದ ಫಲ, ಮತ್ತೊಂದು ದೃಷ್ಟಿಯಲ್ಲಿ ಪ್ರಕೃತಿಯಲ್ಲಿ ಸಾದೃಶ್ಯವನ್ನು ಕಾಣುವ ಮನುಷ್ಯ ಸಾಮಥ್ರ್ಯದ ಫಲಿತಾಂಶ. ಊಹೆಯಿಂದ ಬಿಡಿಸಬೇಕಾದ ಸಂದಿಗ್ಧಮಯವಾದ ಹೇಳಿಕೆ. ಇದು ರೂಪಕ ಮೂಲ. ಎರಡು ವಸ್ತುಗಳ ತರ್ಕಬದ್ಧ ಸಮೀಕರಣೆ. ಜೇಮ್ಸ ಎ. ಕೆಲ್ಸೋನ ಈ ಹೇಳಿಕೆಯು ಮಾನವನಲ್ಲಿ ಸಹಜವಾಗಿಯೇ ಇರುವ ಹಾಸ್ಯ ವಿಡಂಬನೆಗಳು ಒಗಟಿನ ರಚನೆಗೆ ಕಾರಣವಾಗಿವೆ ಎಂಬುದನ್ನು ಸಾಧಿಸುತ್ತದೆ. ಮೇಲುನೋಟಕ್ಕೆ ಕೆಲವು ಒಗಟುಗಳು ಅಶ್ಲೀಲವಾಗಿ ಕಾಣುತ್ತವೆ. ಕ್ಷೇತ್ರ ಕಾರ್ಯದಲ್ಲಿ ಇಂಥ ಒಗಟುಗಳನ್ನು ಹೇಖುವ ಸಂದರ್ಭದಲ್ಲಿ ಜನಪದರಲ್ಲಿ ಯಾವ ಮುಜುಗರವು ತೋರದಿರುವದು ಅವುಗಳ ಉತ್ತರದಲ್ಲಿರುವ ಪರಿಶುದ್ಧತೆಯೇ ಕಾರಣವಾಗಿದೆ. ಇಲ್ಲಿ ಬರುವ ಪದಗಳು ಅಶ್ಲೀಲವಾಗಿದ್ದರೂ, ಅದರ ಉತ್ತರ ಮತ್ತು ಒಳ ಅರ್ಥ ಅತ್ಯಂತ ಶುದ್ಧವಾಗಿರುತ್ತದೆ. ಇಂಥ ಸಮಯದಲ್ಲಿ ಶೀಲಕ್ಕೂ, ಅಶ್ಲೀಲಕ್ಕೂ ಗೆರೆ ಎಳೆಯುವುದು ಬಹಳ ಕಷ್ಟದ ವಿಷಯ.
        “ಬಹುತೇಕ ಒಗಟುಗಳು ಭಾಷೆ ಹಾಗೂ ಸಾಹಿತ್ಯ ಸೌಂದರ್ಯದ ಅಶಂಗಳನ್ನು ರೂಢಿಸಿಕೊಂಡ ಹೇಳಿಕೆಗಳಾಗಿವೆ. ಒಗಟು ಪ್ರಾಚೀನವಾದ ಸುವ್ಯವಸ್ಥಿತಗೊಂಡ ಆಲೋಚನೆಯ ಫಲವಾಗಿz.É” ಆದಿವಾಸಿಗಳ ಬಾಳಿನಲ್ಲಿ ಪ್ರಕೃತೆಯ ಪಾತ್ರ ಮಹತ್ತರವಾದುದು. ಪ್ರಕೃತಿಗೂ ಮಾನವನಿಗೂ ಇದ್ದ ನಿಕಟ ಸಂಪರ್ಕದ ಫಲವಾಗಿ ಒಗಟು ಸೃಷ್ಟಿಯಾಗಿರಬೇಕು. ಒಗಟಿನಲ್ಲಿ ಕಾಣಬರುವ ಅನೇಕ ಪ್ರಕೃತಿಪರ ವಸ್ತು ಚಿತ್ರಗಳೇ ಇದಕ್ಕೆ ಸಾಕ್ಷಿ.
             ಎಲ್ಲಾ ಕಾಲದಾಗ ಹಸಿರ ಇರತೈತಿ      (ಗಿಳಿ)

             ಕೆಂಪ ಹುಡುಗ ಹಸಿರು ಟೊಪ್ಪಿಗಿ       (ಕೆಂಪು ಮೆಣಸಿನಕಾಯಿ)

 ಒಗಟುಗಳು ಸಾಮಾನ್ಯವಾಗಿ ಕಾವ್ಯರೂಪದಲ್ಲಿರುತ್ತವೆ. ಬುದ್ಧಿಯ ಕೌಶಲ್ಯವನ್ನು ಒರೆಗೆ ಹಚ್ಚಿ ನೋಡುವ ಇವುಗಳ ಹಿನ್ನೆಲೆಯಲ್ಲಿ ವಿಶಿಷ್ಠವಾದ ಕವಿಯ ಮನೋಧರ್ಮದ ಮಿಡಿತವನ್ನು ಕಾಣಬಹುದು. ಒಂದು ಅರ್ಥದಲ್ಲಿ ಒಂದೊಂದು ಒಗಟೂ ಪುಟ್ಟ ಭಾವಗೀತೆ” .. ಒಟ್ಟಾರೆ ಒಗಟು ಸಂಕ್ಷಿಪ್ತ ರೂಪದ ಒಂದು ಆಕರ್ಷಕ ರಚನೆ.
 ಒಗಟುಗಳು ಸಾಹಿತ್ಯಿಕ ಮೌಲ್ಯವನ್ನು ಒಳಗೊಂಡ ಜನಪದ ಸಾಹಿತ್ಯದ ಶ್ರೇಷ್ಠ ರಚನೆಗಳಾಗಿವೆ. ಒಗಟು ಪರಿಭಾವಿಸಿದಷ್ಟೂ ಅರ್ಥಪರೆ ಬಿಚ್ಚಿಕೊಳ್ಳುವ ಗುಣವಿಷೇಶದಿಂದ, ಶ್ರೇಷ್ಠ ಕಾವ್ಯದ ನಿಲುವಿಗೇರುವ ಅಂಶಗಳನ್ನೂ ಹೊಂದಿದೆ. ಇಲ್ಲಿ ಮುಖ್ಯವಾದ ಸಂಗತಿಯೆಂದರೆ ಒಗಟು ರೂಪಕ ಮೂಲವಾದದ್ದೆಂಬುದು. ಈ ಗುಣದಿಂದಲೇ ಅದು ಧ್ವನಿಪೂರ್ಣವಾಗುತ್ತದೆ. ಧ್ವನಿ ಸಂಕ್ಷಿಪ್ತತೆಗೆ ಸಾಧನವಾದ ಸಾಂಕೇತಿಕತೆಯನ್ನು ಅರಸುತ್ತದೆ. ಹೀಗೆ ಸಾಂಕೇತಿಕತೆಯಲ್ಲಿ ಅಭಿವ್ಯಕ್ತಿಗೊಂಡ ಸಂಕ್ಷಿಪ್ತ ಕಾವ್ಯವೇ ಒಗಟು”

               ಚಿಕ್ಕ ಚಿಕ್ಕ ಹೋರಿ ಚಿಲಾರಿ ಹೋರಿ
               ಸಂಜೀಕ ಬರತೈತಿ ಕಿಲಾರಿ ಹೋರಿ   (ಕೌದಿ)

               ಓಡತೈತಿ ಕಾಲಿಲ್ಲ
               ಒತ್ತತೈತಿ ತೋಳಿಲ್ಲ              (ದಿನ)

 ಭಾವ ಹೆಪ್ಪುಗಟ್ಟಿ ಗೀತೆಯಾಗುವಂತೆ, ಭಾವ ಬುದ್ಧಿಗಳ ರಸಾಯನದಿಂದ ಗಾದೆಯಾಗುವಂತೆ, ಬುದ್ಧಿ ಹರಳಗೊಂಡು ಒಗಟಾಗುತ್ತದೆ. “ಪ್ರಾಚೀನವಾದ ಜನಪದ ಸಂಸ್ಕøತಿ ಬುದ್ಧಿ ಪ್ರತಿಭೆಗಳ ಸಂಯೋಜಿತ ಸೃಷ್ಟಿಯಾದ ಸೌಚಿದರ್ಯ, ಕಾರ್ಯಕಾರಣ ತರ್ಕಶಕ್ತಿಗಳನ್ನೊಳಗೊಂಡ, ಸಿಪ್ಪೆ ಸುಲಿಯುತ್ತಾ ತಿರುಳಿನೆಡೆಗೆ ಸೆಳೆದೊಯ್ಯುವ ಅರ್ಥಾಪೇಕ್ಷಿಯಾದ ಪದಚಕ್ರವ್ಯೂಹವೇ ಒಗಟು.”
  ಒಗಟು ಎಲ್ಲ ವಯೋಮಾನದವರಲ್ಲೂ ಉಳಿದುಕೊಂಡು ಬಂದಿವೆ. ಮಕ್ಕಳು, ಹಿರಿಯರು ತಮ್ಮ ಅನುಭವದ ಹಿನ್ನೆಲೆಯಲ್ಲಿ ಇವನ್ನು ಬಳಸುತ್ತಾರೆ. ಪ್ರಾಚೀನ ಕಾಲದಿಂದಲೂ ಮಾನವ ಮನಸ್ಸು ತನ್ನ ಸುತ್ತಲಿನ ವಾತಾವರಣದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಯತ್ನದಿಂದಾಗಿ ಒಗಟುಗಳು ಹುಟ್ಟಿಕೊಂಡಿವೆ. ಎಲ್ಲ ವಿಧದ ಸಾಮರಸ್ಯಯುಕ್ತತೆ, ಅಸಂಬದ್ಧತೆಗಳೂ ಮಕ್ಕಳು ಮತ್ತು ಮಕ್ಕಳಂಥ ಮನುಷ್ಯರ ಗಮನ ಸೆಳೆಯುತ್ತವೆ. ಆದ್ದರಿಂದಲೇ ಒಗಟುಗಳು ಮಕ್ಕಳಿಗೆ ಪ್ರಿಯ. ಒಗಟುಗಳು ಮಾನಸಿಕ ಶೈಶವಾವಸ್ಥೆಯ ನಿಗೂಢತೆಗಳೂ ಹೌದು. ವಿವೇಚನೆಯೂ ಹೌದು. ನಾಗರಿಕತೆ ಮುಂದುವರೆದಂತೆ ಅವು ಇನ್ನೂ ಜೀವಂತವಾಗಿ ಉಳಿದಿವೆ. ಸರಳವಾದ ಹೋಲಿಕೆಗಳು ಶ್ಲೇಷಗಳಾದಂತೆ ಅವುಗಳಲ್ಲಿಯ ಆಸಕ್ತಿ ಮಸುಕಾಗುತ್ತಾ ಅಳಿಸುತ್ತಾ ಬಂದಂತೆ ಒಗಟುಗಳು ಮತ್ತಷ್ಟು ಸಂಕೀರ್ಣವೂ, ಪ್ರಜ್ಞಾಪೂರ್ವಕವೂ ಆಗುತ್ತವೆ” ಎಂಬುದು ಒಗಟುಗಳ ಸರ್ವಕಾಲಿಕ ಶ್ರೇಷ್ಠತೆಯನ್ನು ಸಾರುತ್ತದೆ.  # (ಕೃಪೆ : ಅವಧಿ)
======================================================================
ವಿಳಾಸ : ಡಾ.ಪ್ರಕಾಶ ಗ.ಖಾಡೆ,ಮನೆ ನಂ.ಎಸ್.135,ಸೆಕ್ಟರ್ ನಂ.63,ನವನಗರ,ಬಾಗಲಕೋಟ. ಮೊ.9845500890